ವಿಟ್ಲ: ಶಾಲಾ ಬಸ್ ಒಂದರಲ್ಲಿ ದಿಢೀರ್ ತಾಂತ್ರಿಕ ದೋಷ ಕಾಣಿಸಿಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಭೀಕರ ಘಟನೆ ವಿಟ್ಲಪಡೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಸ್ಸಿನ ಮೇಲೆಯೇ ಬಿದ್ದಿದ್ದರೂ, ಚಾಲಕನ ಸಮಯಪ್ರಜ್ಞೆ ಹಾಗೂ ಸ್ಥಳೀಯರ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬಸ್ಸಿನಲ್ಲಿದ್ದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಾವುದೇ ಗಾಯಗಳಿಲ್ಲದೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಖಾಸಗಿ ಶಾಲೆಯೊಂದಕ್ಕೆ ಸೇರಿದ ಈ ಬಸ್, ಬೆಳಗಿನ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿತ್ತು. ಕುಂಟುಕುಡೇಲು ಬಳಿಯ ಇಳಿಜಾರು ರಸ್ತೆಯಲ್ಲಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ವಾಹನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆಯಿಂದ ಕೆಳಗಿಳಿದು ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಜೋರಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ತೀವ್ರತೆಗೆ ವಿದ್ಯುತ್ ಕಂಬವು ಬುಡ ಸಮೇತ ಮುರಿದು ಬಸ್ಸಿನ ಮುಂಭಾಗದ ಮೇಲೆಯೇ ಬಿದ್ದಿದ್ದು, ವಾಹನದ ಮುಂಭಾಗ ಜಜ್ಜಲ್ಪಟ್ಟಿದೆ. ಘಟನೆ ಸಂಭವಿಸುತ್ತಿದ್ದಂತೆ ಸುತ್ತಮುತ್ತಲಿನ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಆತಂಕಗೊಂಡಿದ್ದ ಮಕ್ಕಳನ್ನು ಸುರಕ್ಷಿತವಾಗಿ ಬಸ್ಸಿನಿಂದ ಹೊರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ವಿದ್ಯುತ್ ಅವಘಡವಾಗಲಿ, ಯಾರಿಗೂ ಗಾಯಗಳಾಗಲಿ ಸಂಭವಿಸದಿರುವುದು ಹೆತ್ತವರು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತೆ ಮಾಡಿದೆ.
