ದಕ್ಷಿಣ ಕನ್ನಡ

ಬಂಟ್ವಾಳ : ಒಡಿಯೂರಿನಲ್ಲಿ ಶ್ರೀಗಳ ಜನ್ಮದಿನೋತ್ಸವ ಸಂಭ್ರಮ: ಬೃಹತ್ ವೈದ್ಯಕೀಯ ಸೇವಾ ಶಿಬಿರಕ್ಕೆ ಚಾಲನೆ

 


ಬಂಟ್ವಾಳ: ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನಮ್‌ನ ಪೂಜ್ಯ ಶ್ರೀಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವದ ಅಂಗವಾಗಿ, ಜನ್ಮದಿನೋತ್ಸವ ಸಮಿತಿಯ ನೇತೃತ್ವದಲ್ಲಿ ರವಿವಾರ (ಆಗಸ್ಟ್ 02) ಸಂಸ್ಥಾನದ ರಾಜಾಂಗಣದಲ್ಲಿ ಬೃಹತ್ ವೈದ್ಯಕೀಯ ಸೇವಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

​ಕಾರ್ಯಕ್ರಮಕ್ಕೆ ಶ್ರೀಗುರುದೇವಾನಂದ ಸ್ವಾಮೀಜಿಯವರು ದೀಪ ಬೆಳಗಿಸುವ ಮೂಲಕ ಅಧಿಕೃತ ಚಾಲನೆ ನೀಡಿ, ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಾಧ್ವಿ ಶ್ರೀ ಮಾತಾನಂದಮಯೀ ಅವರು ಕೂಡ ಉಪದೇಶಾಮೃತ ನೀಡಿದರು.


ಪ್ರಮುಖ ಆಸ್ಪತ್ರೆಗಳ ಸಹಯೋಗದಲ್ಲಿ ಉಚಿತ ಚಿಕಿತ್ಸೆ:

​ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಆಯೋಜಿಸಲಾಗಿದ್ದ ಈ ಬೃಹತ್ ಶಿಬಿರದಲ್ಲಿ ಹಲವು ಪ್ರಸಿದ್ಧ ವೈದ್ಯಕೀಯ ಸಂಸ್ಥೆಗಳು ಸಾಥ್ ನೀಡಿದ್ದವು:

  • ವಿವಿಧ ತಪಾಸಣೆಗಳು: ಮಂಗಳೂರಿನ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಹೃದಯ, ಎಲುಬು ಹಾಗೂ ಶಾರದಾ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನೇತೃತ್ವದಲ್ಲಿ ಉಚಿತ ಆಯುಷ್ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಯಿತು.
  • ದಂತ ಮತ್ತು ನೇತ್ರ ಚಿಕಿತ್ಸೆ: ದೇರಳಕಟ್ಟೆಯ ಎ.ಬಿ. ಶೆಟ್ಟಿ ಸ್ಮಾರಕ ದಂತ ವೈದ್ಯಕೀಯ ಮಹಾವಿದ್ಯಾಲಯದಿಂದ ದಂತ ತಪಾಸಣೆ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಹಾಗೂ ಬೆಂಗಳೂರಿನ ಒನ್ ಸೈಟ್ ಎಸ್ಸಿಲಾರ್ ಲಕ್ಸೋಟಿಕಾ ಫೌಂಡೇಶನ್ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಲಾಯಿತು.
  • ರಕ್ತದಾನ ಶಿಬಿರ: ಮಂಗಳೂರಿನ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ವಿಭಾಗ ಮತ್ತು ಕನ್ಯಾನ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದಲ್ಲಿ ಬೃಹತ್ ರಕ್ತದಾನ ಶಿಬಿರ ಜರುಗಿತು.


ಈ ವಿಶೇಷ ವೈದ್ಯಕೀಯ ಶಿಬಿರದಲ್ಲಿ ವಿವಿಧ ಆಸ್ಪತ್ರೆಗಳ ಪ್ರಖ್ಯಾತ ವೈದ್ಯರು, ವೈದ್ಯಕೀಯ ಕಾಲೇಜುಗಳ ಪ್ರಾಂಶುಪಾಲರು, ಪೀಠದ ಪ್ರೊಫೆಸರ್‌ಗಳು ಹಾಗೂ ಸಂಸ್ಥಾನದ ಮುಖಂಡರು ಭಾಗವಹಿಸಿದ್ದರು. ಶಿಬಿರದಲ್ಲಿ ನೂರಾರು ಸಾರ್ವಜನಿಕರು ಭಾಗವಹಿಸಿ ಉಚಿತ ಚಿಕಿತ್ಸೆಯ ಪ್ರಯೋಜನ ಪಡೆದುಕೊಂಡರು.



image